ಸನ್ಮಾರ್ಗ ವಾರ್ತೆ
ಮಹಾರಾಷ್ಟ್ರದಲ್ಲಿ ನಾಲ್ಕು ದಶಕಗಳ ನಿಷ್ಪಕ್ಷಪಾತ ಪತ್ರಿಕೋದ್ಯಮಕ್ಕೆ ಹೆಸರಾಗಿರುವ ಹಿರಿಯ ಪತ್ರಕರ್ತ ನಿಖಿಲ್ ವಾಗ್ಲೆ ಅವರ ಕಾರಿನ ಮೇಲೆ ಪುಣೆಯಲ್ಲಿ ಬಿಜೆಪಿ ಕಾರ್ಯಕರ್ತರು ದಾಳಿ ನಡೆಸಿದ ಘಟನೆ ಶುಕ್ರವಾರ ಸಂಜೆ ನಡೆದಿದೆ.
ಎಲ್ಕೆ ಅಡ್ವಾಣಿ ಅವರಿಗೆ ಭಾರತ ರತ್ನ ಘೋಷಣೆ ಮಾಡಿದ ಹಿನ್ನೆಲೆಯಲ್ಲಿ ನಿಖಿಲ್ ಸಾಮಾಜಿಕ ಜಾಲತಾಣದಲ್ಲಿ ಅಭಿಪ್ರಾಯ ಬರೆದಿದ್ದರು. ಈ ಅಭಿಪ್ರಾಯವನ್ನು ವಿರೋಧಿಸಿ ಹಿರಿಯ ಬಿಜೆಪಿ ನಾಯಕ ಸುನೀಲ್ ಡಿಯೋಡಾರ್ ಅವರು ಶುಕ್ರವಾರ ವಿಶ್ರಾಮ್ಬಾಗ್ ಪೊಲೀಸ್ ಠಾಣೆಯಲ್ಲಿ ನಿಖಿಲ್ ವಿರುದ್ಧ ದೂರು ದಾಖಲಿಸಿದ್ದರು.
‘ನಿರ್ಭಯ್ ಬನೋ’ ಎನ್ನುವ ಕಾರ್ಯಕ್ರಮದಲ್ಲಿ ನಿಖಿಲ್ ಭಾಗವಹಿಸುವ ಹಿನ್ನೆಲೆಯಲ್ಲಿ ಅದನ್ನು ನಿಷೇಧಿಸಬೇಕು ಎಂದು ಬಿಜೆಪಿ ಪುಣೆ ಪೊಲೀಸರಿಗೆ ಮನವಿ ಮಾಡಿತ್ತು. ಆದರೆ ನಿಖಿಲ್, “ಇಂತಹ ಬೆದರಿಕೆಗಳಿಗೆ ಬಗ್ಗುವುದಿಲ್ಲ, ಕಾರ್ಯಕ್ರಮದಲ್ಲಿ ಭಾಗವಹಿಸುತ್ತೇನೆ” ಎಂದು ತಿಳಿಸಿದ್ದರು.
ಈ ಸಭೆಗೆ ತೆರಳುತ್ತಿದ್ದಾಗ ಡೆಕ್ಕನ್ ಪ್ರದೇಶದ ಖಂಡೋಜಿ ಬಾಬಾ ಚೌಕ್ನಲ್ಲಿ ಸೇರಿದ್ದ ಬಿಜೆಪಿ ಕಾರ್ಯಕರ್ತರು, ಪೊಲೀಸರ ಭದ್ರತೆಯ ನಡುವೆಯೂ ವಾಗ್ಲೆ ಅವರ ಕಾರಿಗೆ ಕಲ್ಲು ತೂರಾಟ ನಡೆಸಿದ್ದಾರೆ ಎಂದು ವರದಿಯಾಗಿದೆ. ದಾಳಿಯ ನಂತರವೂ ವಾಗ್ಲೆ ಅವರು ಸಭೆಯ ಸ್ಥಳಕ್ಕೆ ತಲುಪುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ತಿಳಿದು ಬಂದಿದೆ.
ನಿಖಿಲ್ ವಾಗ್ಲೆ ಸಂಚರಿಸುತ್ತಿದ್ದ ಕಾರಿನಲ್ಲಿ ನ್ಯಾಯವಾದಿ ಆಸಿಮ್ ಸರೋದೆ ಮತ್ತು ಸಾಮಾಜಿಕ ಕಾರ್ಯಕರ್ತ ವಿಶ್ವಂಭರ್ ಚೌಧರಿ ಕೂಡ ಇದ್ದರೆಂದು ವರದಿಯಾಗಿದೆ.
ಬಿಜೆಪಿಯವರ ದಾಳಿಯಿಂದ ಕಾರಿನ ಗಾಜು ಹುಡಿಯಾಗಿದ್ದು, ಕೂಡಲೇ ಕಾರನ್ನು ಸುತ್ತುವರಿದ ಪುಣೆ ಪೊಲೀಸರು ಹೆಚ್ಚಿನ ಅನಾಹುತದಿಂದ ಪಾರು ಮಾಡಿದ್ದಾರೆ. ದಾಳಿ ನಡೆಸಿರುವ ದೃಶ್ಯವು ಕ್ಯಾಮರಾಗಳಲ್ಲಿ ಸೆರೆಯಾಗಿದೆ.