ಸನ್ಮಾರ್ಗ ವಾರ್ತೆ
ಲಕ್ನೊ: ಉತ್ತರ ಪ್ರದೇಶದ ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಅಜಯ್ ಮಿಶ್ರಾರ ಪುತ್ರ ಆಶಿಷ್ ಮಿಶ್ರಾರ ಜಾಮೀನು ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ನ ಲಕ್ನೋ ಪೀಠವು ತಿರಸ್ಕರಿಸಿದೆ.
ಕಳೆದ ವರ್ಷ ಅಕ್ಟೋಬರ್ 3ರಂದು ಯುಪಿಯ ಲಖೀಂಪುರ ಖೇರಿಯಲ್ಲಿ ಭುಗಿಲೆದ್ದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಆಶಿಷ್ ಮಿಶ್ರಾನನ್ನು ಅಕ್ಟೋಬರ್ 9ರಂದು ಬಂಧಿಸಲಾಗಿತ್ತು.
ಅಕ್ಟೋಬರ್ 3ರಂದು ಲಖಿಂಪುರ ಖೇರಿಗೆ ಬಿಜೆಪಿ ಉಪ ಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಭೇಟಿ ನೀಡಿದ್ದು, ಈ ವೇಳೆ ವಿವಾದಿತ ಕೃಷಿ ಕಾನೂನುಗಳ ವಿರುದ್ಧ ಮೌನವಾಗಿ ಪ್ರತಿಭಟನಾ ಮೆರವಣಿಗೆ ನಡೆಸುತ್ತಿದ್ದ ರೈತರ ಮೇಲೆ ಹಿಂಬದಿಯಿಂದ ಕಾರು ಹರಿದಿತ್ತು. ಈ ಘಟನೆಯ ಬೆನ್ನಲ್ಲೇ ಹಿಂಸಾಚಾರ ಭುಗಿಲೆದ್ದಿದ್ದು, ಓರ್ವ ಪತ್ರಕರ್ತ, ನಾಲ್ವರು ರೈತರು ಹಾಗೂ ಮೂವರು ಬಿಜೆಪಿ ಕಾರ್ಯಕರ್ತರು ಮೃತಪಟ್ಟಿದ್ದರು.