8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ, ಕೊಲೆ ಪ್ರಕರಣ: ಆರೋಪಿಗಳಿಗೆ ಗಲ್ಲು ಶಿಕ್ಷೆ ಜಾರಿಗೊಳಿಸಿ- ಜೆಡಿಎಸ್ ಮಹಿಳಾ ನಾಯಕಿ ಡಾ.ಸುಮತಿ ಎಸ್ ಹೆಗ್ಡೆ ಒತ್ತಾಯ

0
185

ಸನ್ಮಾರ್ಗ ವಾರ್ತೆ
ಮಂಗಳೂರು: ರಾಜ್ಯ, ದೇಶದ ವಿವಿಧೆಡೆ ಶಾಲಾ ಮಕ್ಕಳ ಸಹಿತ ಅಪ್ರಾಪ್ತೆಯರ ಮೇಲೆ ಅತ್ಯಾಚಾರ ಪ್ರಕರಣಗಳು ಮೇಲಿಂದ ಮೇಲೆ ನಡೆಯುತ್ತಿರುವುದು ಕಳವಳಕಾರಿ ಸಂಗತಿ. ಇತ್ತೀಚಿಗೆ ಮಂಗಳೂರಿನ ಪರಾರಿಯಲ್ಲಿ ಎಂಟರ ಹರೆಯದ ಮುಗ್ದ ಬಾಲಕಿಯನ್ನು ಸಾಮೂಹಿಕ ಅತ್ಯಾಚಾರಗೈದು, ಕೊಂದು ಡ್ರೈನೇಜ್ ಗೆ ಬಿಸಾಡಿದ ದುರುಳರ ಕೃತ್ಯವನ್ನು ತೀವ್ರವಾಗಿ ಖಂಡಿಸುತ್ತಾ ಮೃತ ಬಾಲಕಿಯ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು, ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಜೆಡಿಎಸ್ ನಾಯಕಿ ಡಾ.ಸುಮತಿ ಎಸ್ ಹೆಗ್ಡೆ ಮಂಗಳೂರು ಪತ್ರಿಕಾ ಪ್ರಕಟಣೆ ಮೂಲಕ ಆಗ್ರಹಿಸಿದರು.

ಮಹಿಳೆಯರ ಮೇಲೆ ನಡೆಯುತ್ತಿರುವ ಅತ್ಯಾಚಾರ,ಕೊಲೆ, ದೌರ್ಜನ್ಯಗಳಿಗೆ ಕೇಂದ್ರ ಸರ್ಕಾರ ಕಡಿವಾಣ ಹಾಕಬೇಕು ಎಂದು ಅವರು ಈ ಸಂದರ್ಭದಲ್ಲಿ ಆಗ್ರಹಿಸಿದರು.

ಇತ್ತೀಚಿಗೆ ವಿದ್ಯಾರ್ಥಿನಿಯರ ಮೇಲೆ, ಮಹಿಳೆಯರ ಮೇಲೆ ಹಲ್ಲೆ, ಅತ್ಯಾಚಾರ, ದೌರ್ಜನ್ಯದಂತಹ ಪ್ರಕರಣಗಳು ಹೆಚ್ಚುತ್ತಿದ್ದು, ಜಿಲ್ಲಾಡಳಿತ ಹಾಗೂ ತಾಲೂಕ ಆಡಳಿತವು ವಿದ್ಯಾರ್ಥಿನಿಯರಿಗೆ, ಮಹಿಳೆಯರಿಗೆ ಸೂಕ್ತ ರಕ್ಷಣೆ ಒದಗಿಸಬೇಕು. ಶಾಲಾ-ಕಾಲೇಜು, ಕಾರ್ಖಾನೆ ಜನ ನಿಭಿಡ ಪ್ರದೇಶಗಳಲ್ಲಿ ಬಸ್ ನಿಲ್ದಾಣಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸಬೇಕು ಹಾಗೂ ಪೋಲಿಸ್ ಸಿಬ್ಬಂದಿಯನ್ನು ಬಸ್ ನಿಲ್ದಾಣ ಮತ್ತು ನಗರ ಪ್ರದೇಶದಿಂದ ದೂರವಿರುವ ಕಾಲೇಜುಗಳ ಬಳಿ ನಿಯೋಜನೆ ಮಾಡುವಂತೆ ಒತ್ತಾಯಿಸಿದರು.