ಮಂಗಳೂರು| ನಾಪತ್ತೆಯಾಗಿದ್ದ ಖಾಸಗಿ ಶಾಲೆಯ ನಾಲ್ವರು ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಮೃತದೇಹ ಪತ್ತೆ

0
547

ಸನ್ಮಾರ್ಗ ವಾರ್ತೆ

ನಿನ್ನೆಯಿಂದ ನಾಪತ್ತೆಯಾಗಿದ್ದ ಸುರತ್ಕಲ್‌ನ ಖಾಸಗಿ ಶಾಲೆಯ ನಾಲ್ವರು ವಿದ್ಯಾರ್ಥಿಗಳ ಮೃತದೇಹ ಹಳೆಯಂಗಡಿಯ ಕೊಪ್ಪಳ ಅಣೆಕಟ್ಟಿನ ರೈಲ್ವೆ ಸೇತುವೆ ಕೆಳಭಾಗದ ನದಿಯಲ್ಲಿ ಪತ್ತೆಯಾದ ದಾರುಣ ಘಟನೆ ನಡೆದಿದೆ.

ಮೃತ ಮಕ್ಕಳನ್ನು ಯಶ್ಚಿತ್‌(15), ಹಳೆಯಂಗಡಿ ತೋಕೂರು ನಿವಾಸಿ ವಸಂತ್ ಅವರ ಪುತ್ರ ರಾಘವೇಂದ್ರ(15), ವಿಶ್ವನಾಥ್ ಅವರ ಪುತ್ರ ನಿರೂಪ(15), ದೇವದಾಸ್ ಅವರ ಮಗ ಅನ್ವಿತ್‌(15) ಎಂದು ಗುರುತಿಸಲಾಗಿದೆ.

ಈ ವಿದ್ಯಾರ್ಥಿಗಳು ಖಾಸಗಿ ಪ್ರೌಢ ಶಾಲೆಯಲ್ಲಿ 10ನೇ ತರಗತಿಯಲ್ಲಿ ಓದುತ್ತಿದ್ದು, ಮಂಗಳವಾರ ಎಸ್.ಎಸ್.ಎಲ್. ಸಿ ಇಂಗ್ಲಿಷ್ ಪೂರ್ವ ಸಿದ್ಧತಾ ಪರೀಕ್ಷೆ ಬರೆದ ಬಳಿಕ 1:30ರ ನಂತರ ನಾಪತ್ತೆಯಾಗಿದ್ದರು.

ನಾಪತ್ತೆ ಪ್ರಕರಣ ದಾಖಲಾಗುತ್ತಿದ್ದಂತೆಯೇ ಕಾರ್ಯಾಚರಣೆಗೆ ಇಳಿದಿದ್ದ ಸುರತ್ಕಲ್ ಠಾಣಾ ಪೊಲೀಸರು, ಶಾಲೆ ಮತ್ತು ಬಸ್ ನಿಲ್ದಾಣದ ಬಳಿಯ ಸಿಸಿಟಿವಿ ದೃಶ್ಯಾವಳಿಗಳನ್ನು ತರಿಸಿಕೊಂಡಿದ್ದರು.

ವಿದ್ಯಾರ್ಥಿಗಳು ಸುರತ್ಕಲ್ ಬಸ್ ನಿಲ್ದಾಣದಿಂದ ಬಸ್ ಹತ್ತಿ ಹಳೆಯಂಗಡಿ ಬಸ್ ನಿಲ್ದಾಣದಲ್ಲಿ ಬಸ್ ಇಳಿದಿರುವುದನ್ನು ಪತ್ತೆ ಹಚ್ಚಿದ್ದರು. ಜೊತೆಗೆ ವಿದ್ಯಾರ್ಥಿಯೋರ್ವನ ಬಳಿ ಇತ್ತೆನ್ನಲಾದ ಮೊಬೈಲ್ ಟವರ್ ಲೋಕೇಶನ್ ಆಧರಿಸಿ ವಿದ್ಯಾರ್ಥಿಗಳು ನದಿಯ ದಡಕ್ಕೆ ಬಂದಿರುವುದನ್ನು ಖಚಿತ ಪಡಿಸಿಕೊಂಡು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದಾಗ ನದಿಯ ದಡದಲ್ಲಿ ಮಕ್ಕಳ ಶಾಲೆಯ ಚೀಲಗಳು, ಚಪ್ಪಲಿ ಶಾಲೆಯ ಸಮವಸ್ತ್ರಗಳು ಪತ್ತೆಯಾಗಿವೆ.

ಮೃತರನ್ನು ಮರಣೋತ್ತರ ಪರೀಕ್ಷೆಗಾಗಿ ನಗರದ ವೆನ್ ಲಾಕ್ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ. ಘಟನೆಗೆ ಸಂಬಂಧಿಸಿ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.