ಸನ್ಮಾರ್ಗ ವಾರ್ತೆ
ಮಂಗಳೂರು: ಶಾಂತಿ ಮತ್ತು ಸುವ್ಯವಸ್ಥೆ ಇಲ್ಲದಿದಲ್ಲಿ ಸಮಾಜದಲ್ಲಿ ನೆಮ್ಮದಿ ಕಾಣಲು ಸಾಧ್ಯವಿಲ್ಲ. ಈ ನಿಟ್ಟಿನಲ್ಲಿ ನ್ಯಾಯಾಂಗದ ಕರ್ತವ್ಯ ನಿರ್ವಹಣೆಗೆ ಕಟ್ಟಡ ಸೇರಿದಂತೆ ಸಮರ್ಪಕ ವ್ಯವಸ್ಥೆ ಕಲ್ಪಿಸುವುದು ಸರಕಾರದ ಆದ್ಯ ಕರ್ತವ್ಯವಾಗಿದೆ. ವ್ಯಾಜ್ಯ ಎಂಬುದು ಕ್ಯಾನ್ಸರ್ನಂತೆ, ವ್ಯಾಜ್ಯವಿದ್ದಲ್ಲೀ ಶಾಂತಿ ಇರುವುದಿಲ್ಲ. ಅದನ್ನು ಪರಿಹರಿಸುವ ನಿಟ್ಟಿನಲ್ಲಿ ನ್ಯಾಯಾಲಯಗಳ ವ್ಯವಸ್ಥೆ ಅನಿವಾರ್ಯವಾಗಿದೆ ಎಂದು ಸುಪ್ರೀಂ ಕೋರ್ಟ್ನ ನ್ಯಾಯಮೂರ್ತಿಗಳಾದ ಎಸ್. ಅಬ್ದುಲ್ ನಝೀರ್ ಅವರು ಬಣ್ಣಿಸಿದರು.
ಅವರು ಇಂದು ಪುತ್ತೂರಿನ ಆನೆಮಜಲಿನಲ್ಲಿ ನೂತನ ನ್ಯಾಯಾಲಯ ಸಂಕೀರ್ಣದ 2ನೇ ಹಂತದ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ, ನೂತನವಾಗಿ ನಿರ್ಮಿಸಲಾಗಿರುವ ವಕೀಲರ ಭವನವನ್ನು ಲೋಕಾರ್ಪಣೆ ಮಾಡಿ ಮಾತನಾಡಿದರು.
ಇತ್ತೀಚಿನ ದಿನಗಳಲ್ಲಿ ಮಹಿಳಾ ವಕೀಲರ ಸಂಖ್ಯೆ ಹೆಚ್ಚುತ್ತಿದೆ, ಇದು ಆಶಾದಾಯಕ ಬೆಳವಣಿಗೆಯಾಗಿದ್ದು, ನ್ಯಾಯಾಲಯಗಳು ಹಾಗೂ ವಕೀಲರ ಸಂಘಗಳಲ್ಲಿ ಅವರಿಗೆ ಅಗತ್ಯವಿರುವ ಸೌಕರ್ಯಗಳನ್ನು ಒದಗಿಸಲಾಗುವುದು. ನೂತನವಾಗಿ ನಿರ್ಮಾಣವಾಗಲಿರುವ ನ್ಯಾಯಾಲಯದ ಸಂಕೀರ್ಣದ ಮುಂದಿನ ಆವರಣದಲ್ಲಿ ಎರಡು ಎಕರೆ ಪ್ರದೇಶದಲ್ಲಿ ಉದ್ಯಾನವನ ನಿರ್ಮಿಸಿದ್ದಲ್ಲೀ ಉತ್ತಮ ಪರಿಸರದಲ್ಲಿ ನ್ಯಾಯಾಂಗದ ಕಲಾಪಗಳು ನಡೆಯಲು ಸಹಕಾರಿಯಾಗಲಿದೆ. ಅದಕ್ಕಾಗಿ ಸ್ಥಳೀಯ ಶಾಸಕರು ಕ್ರಮ ವಹಿಸುವಂತೆ ಅವರು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಹೈಕೋರ್ಟ್ನ ನ್ಯಾಯಮೂರ್ತಿಗಳು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಆಡಳಿತಾತ್ಮಕ ನ್ಯಾಯಮೂರ್ತಿ ಕೆ. ಸೋಮಶೇಖರ್ ಮಾತನಾಡಿ, ಯಾವುದೇ ಒಂದು ಕಟ್ಟಡವನ್ನು ನಾವು ನಿರ್ಮಾಣ ಮಾಡುವಾಗಲೂ ಅದರ ಪ್ರತಿಫಲ ಸಮಾಜಕ್ಕೆ ಸಿಗುವಂತಾಗಬೇಕು ಎಂದರು.
ಪುತ್ತೂರು ಶಾಸಕ ಸಂಜೀವ ಮಠಂದೂರು, ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೆಗೌಡ, ರಾಜ್ಯ ಹೈಕೋರ್ಟ್ನ ರಿಜಿಸ್ಟ್ರಾರ್ ನ್ಯಾಯಮೂರ್ತಿ ಶಿವಶಂಕರೇ ಗೌಡ, ಹೈಕೋರ್ಟ್ನ ನ್ಯಾಯಮೂರ್ತಿಗಳಾದ ಮೊಹಮ್ಮದ್ ನವಾಝ್, ಎಸ್. ವಿಶ್ವಜಿತ್ ಶೆಟ್ಟಿ, ರಾಜ್ಯ ಸರ್ಕಾರದ ಹೆಚ್ಚುವರಿ ಅಡ್ವೋಕೇಟ್ ಜನ್ರಲ್ ಅರುಣ್ ಶ್ಯಾಮ್, ಕರ್ನಾಟಕ ರಾಜ್ಯ ವಕೀಲರ ಪರಿಷತ್ತು ಅಧ್ಯಕ್ಷ ಎಲ್. ಶ್ರೀನಿವಾಸ ಬಾಬು ಹಾಗೂ ಕರ್ನಾಟಕ ರಾಜ್ಯ ವಕೀಲರ ಪರಿಷತ್ತಿನ ಸದಸ್ಯ ಪಿ.ಪಿ. ಹೆಗ್ಡೆ ಮಾತನಾಡಿದರು.
ಇದೇ ಸಂದರ್ಭದಲ್ಲಿ ರಾಜ್ಯ ಹೈಕೋರ್ಟ್ನ ನ್ಯಾಯಮೂರ್ತಿಗಳಾದ ಎಸ್. ವಿಶ್ವಜಿತ್ ಶೆಟ್ಟಿ ಮತ್ತು ರಾಜ್ಯ ಸರ್ಕಾರದ ಹೆಚ್ಚುವರಿ ಅಡ್ವೋಕೇಟ್ ಜನ್ರಲ್ ಅರುಣ್ ಶ್ಯಾಮ್ ಅವರನ್ನು ಸನ್ಮಾನಿಸಲಾಯಿತು. ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ ಪ್ರಮೋದ್ ಮತ್ತು ಕಂಟ್ರಾಕ್ಟರ್ ಆಸಿಫ್ ಸೀಕೋ ಅವರನ್ನು ಗೌರವಿಸಲಾಯಿತು.
ಲೋಕೋಪಯೋಗಿ ಇಲಾಖೆಯ ಮುಖ್ಯ ಅಭಿಯಂತರ ಕಾಂತರಾಜ್ ಬಿ.ಟಿ ವೇದಿಕೆಯಲ್ಲಿದ್ದರು.
ವಕೀಲರ ಸಂಘದ ಅಧ್ಯಕ್ಷ ಮನೋಹರ ಕೆ.ವಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮುರಳೀಧರ ರೈ ಸ್ವಾಗತಿಸಿದರು. ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಮಂಜುನಾಥ ಎನ್.ಎಸ್ ವಂದಿಸಿದರು. ನ್ಯಾಯವಾದಿಗಳಾದ ಕೆ.ಆರ್. ಆಚಾರ್ಯ ಹಾಗೂ ದುರ್ಗಾ ಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು.
ರಾಜ್ಯ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಗಳಾದ ರಿತು ರಾಜ್ ಅವಸ್ಥಿ ಅವರು ವಿಡಿಯೋ ಮೂಲಕ ಸಂದೇಶ ನೀಡಿದರು. ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ನೂತನ ವಕೀಲರ ಭವನದ ಆವರಣದಲ್ಲಿ ನ್ಯಾಯಮೂರ್ತಿಗಳು ಸಸಿಗಳನ್ನು ನೆಟ್ಟರು. ನ್ಯಾಯಮೂರ್ತಿಗಳನ್ನು ಮಹಿಳೆಯರು ಪೂರ್ಣ ಕುಂಭ ಕಲಶಗಳ ಮೂಲಕ ಸ್ವಾಗತಿಸಿದರು.