ರಿಪಬ್ಲಿಕ್ ಟಿವಿಯ ಅರ್ನಬ್ ಗೋಸ್ವಾಮಿಗೆ ಸಂಕಷ್ಟ: ಸುಪ್ರೀಂ ಕೋರ್ಟ್‌ನಲ್ಲಿ ಹಿನ್ನಡೆ

0
752

ಸನ್ಮಾರ್ಗ ವಾರ್ತೆ

ನವದೆಹಲಿ,ಅ.15: TRP ತಿರುಚಿದ ಪ್ರಕರಣಕ್ಕೆ ಸಂಬಂಧಿಸಿ ಮುಂಬೈ ಪೊಲೀಸರ ತನಿಖೆಯ ವಿರುದ್ಧ ರಿಪಬ್ಲಿಕ್ ಟಿವಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದೆ ಮತ್ತು ಹೈಕೋರ್ಟಿಗೆ ಮನವಿ ಮಾಡಿಕೊಳ್ಳಿ ಎಂದು ಸಲಹೆ ನೀಡಿದೆ.

ಇನ್ನೊಂದೆಡೆ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಸ್ನೇಹಿತ ಹಾಗೂ ಚಿತ್ರ ನಿರ್ಮಾಪಕ ಸಂದೀಪ್ ಸಿಂಗ್ ಅವರು ಅರ್ನಬ್ ಗೋಸ್ವಾಮಿ ವಿರುದ್ಧ 200 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆಯ ನೋಟಿಸ್ ಜಾರಿಗೊಳಿಸಿದ್ದಾರೆ. 15 ದಿನಗಳೊಳಗೆ 200 ಕೋಟಿ ರೂಪಾಯಿಯನ್ನು ಪರಿಹಾರವಾಗಿ ನೀಡಬೇಕು ಮತ್ತು ಬೇಷರತ್ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ. ಇಲ್ಲದಿದ್ದರೆ ಕ್ರಿಮಿನಲ್ ಮತ್ತು ಸಿವಿಲ್ ಪ್ರಕರಣ ದಾಖಲಿಸುವೆ ಎಂದು ಅವರು ನೋಟಿಸಿನಲ್ಲಿ ಎಚ್ಚರಿಸಿದ್ದಾರೆ.

ಅರ್ನಬ್ ಅವರ ಸಹೋದ್ಯೋಗಿಗಳು ಹಣ ವಸೂಲಿ ಮಾಡುವ ದುರುದ್ದೇಶದಿಂದ ತನ್ನ ವಿರುದ್ಧ ಟ್ವೀಟ್‌ಗಳನ್ನು ಮಾಡಿದ್ದಾರೆ ಮತ್ತು ತನಗೆ ಕಳಂಕ ತರುವ ಪೋಸ್ಟ್‌ಗಳನ್ನು ಹಾಕಿದ್ದಾರೆ. ತನ್ನ ನಿವಾಸಕ್ಕೆ ಪ್ರವೇಶಿಸಲು ಯತ್ನಿಸಿ ಭದ್ರತಾ ಸಿಬ್ಬಂದಿಗಳಿಗೆ ಆಗಸ್ಟ್ 22 ಮತ್ತು 24 ರಂದು ಕಿರುಕುಳ ನೀಡಿದ್ದಾರೆ ಎಂದು ನೋಟಿಸಿನಲ್ಲಿ ಅವರು ಆಪಾದಿಸಿದ್ದಾರೆ.