ಕೊರೋನಾ ನಿಯಂತ್ರಣಕ್ಕೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ: ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ

0
560

ಸನ್ಮಾರ್ಗ ವಾರ್ತೆ

ಮಂಗಳೂರು: ದ.ಕ. ಜಿಲ್ಲೆಯಲ್ಲಿ ಕೋವಿಡ್-19 ನಿಯಂತ್ರಣಕ್ಕೆ ಸಂಬಂಧಿಸಿದಂತೆ, ಸರ್ಕಾರದ ಆದೇಶದಲ್ಲಿ ಸೂಚಿಸಿರುವಂತೆ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವುದು ಅಗತ್ಯವೆಂದು ಮನಗಂಡು ದಂಡ ಪ್ರಕ್ರಿಯಾ ಸಂಹಿತೆ 1973ರ ಕಲಂ 144(3), ವಿಪತ್ತು ನಿರ್ವಹಣಾ ಕಾಯ್ದೆ 2005ರ ಕಲಂ(26) ಹಾಗೂ (34)ರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಜಿಲ್ಲೆಯಾದ್ಯಂತ ತಕ್ಷಣಕ್ಕೆ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆನಿಷೇಧಾಜ್ಞೆಯನ್ನು ಜಾರಿಗೊಳಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ. ರಾಜೇಂದ್ರ ಕೆ.ವಿ ಆದೇಶ ಹೊರಡಿಸಿದ್ದಾರೆ.

ನಿಷೇಧಿತ ಅವಧಿಯಲ್ಲಿ ಜಿಲ್ಲೆಯಾದ್ಯಂತ ಎಲ್ಲಾ ಧಾರ್ಮಿಕ ಸ್ಥಳಗಳಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ನಡೆಯುವ ಜಾತ್ರೆ, ಸಭೆ, ಸಮಾರಂಭ ಹಾಗೂ ಆಚರಣೆಗಳನ್ನು ನಿಷೇಧಿಸಲಾಗಿದ್ದು, ಧಾರ್ಮಿಕ ಆಚರಣೆಗಳನ್ನು ಸಾಂಕೇತಿಕವಾಗಿ ಆಚರಿಸುವುದು ಹಾಗೂ ಮುಂಬರುವ ಧಾರ್ಮಿಕ ಹಬ್ಬಗಳಾದ ಹೋಳಿ ಹಬ್ಬ, ಯುಗಾದಿ, ಷಬ್-ಎ-ಬರಾತ್, ಗುಡ್ ಫ್ರೈಡೇ ಇತ್ಯಾದಿ ಸಂದರ್ಭಗಳಲ್ಲಿ ಜಿಲ್ಲೆಯ ಯಾವುದೇ ಸಾರ್ವಜನಿಕ ಸ್ಥಳಗಳು, ಸಾರ್ವಜನಿಕ ಮೈದಾನ, ಸಾರ್ವಜನಿಕ ಉದ್ಯಾನವನಗಳು, ಮಾರುಕಟ್ಟೆ, ಧಾರ್ಮಿಕ ಪ್ರದೇಶಗಳು ಇತ್ಯಾದಿಗಳಲ್ಲಿ ಸಾರ್ವಜನಿಕ ಸಮಾರಂಭಗಳು, ಸಭೆ, ಜಾತ್ರೆಗಳು, ಮೇಳಗಳನ್ನು ನಡೆಸುವುದನ್ನು ನಿಷೇಧಿಸಲಾಗಿದೆ.

ಸಾರ್ವಜನಿಕ ಸ್ಥಳಗಳಲ್ಲಿ ಸಾರ್ವಜನಿಕರು ಕೋವಿಡ್ ಸಮುಚಿತ ವರ್ತನೆಯನ್ನು ಅಂದರೆ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಉಗುಳದಿರುವುದು ಪಾಲಿಸುವುದು ಕಡ್ಡಾಯವಾಗಿರುತ್ತದೆ. ತಪ್ಪಿದ್ದಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಈ ಆದೇಶವನ್ನು ಯಾವುದೇ ವ್ಯಕ್ತಿಗಳು ಉಲ್ಲಂಘಿಸಿದ್ದಲ್ಲಿ ಅಂತಹವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ-2005 ರ ಸೆಕ್ಷನ್ 51ರಿಂದ 60 ರ ಅನ್ವಯ, ಐಪಿಸಿ ಸೆಕ್ಷನ್ 188 ರಂತೆ ಮತ್ತು ಕರ್ನಾಟಕ ಸಾಂಕ್ರಾಮಿಕ ರೋಗಗಳ ಅಧಿನಿಯಮ 2020 ರ ಸೆಕ್ಷನ್ 4,5 ಮತ್ತು 10 ರಂತೆ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.