ಸನ್ಮಾರ್ಗ ವಾರ್ತೆ
ಮಂಗಳೂರು: ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ಮತ್ತು ಮೌಲಾನಾ ಆಝಾದ್ ರಾಷ್ಟ್ರೀಯ ಶಿಷ್ಯವೇತನವನ್ನು ಸರ್ಕಾರ ಪುನರಾರಂಭಿಸಬೇಕೆಂದು ಎಸ್ಐಒ ರಾಜ್ಯ ಕಾರ್ಯದರ್ಶಿ ಮುಹಮ್ಮದ್ ಪೀರ್ ಲಟಗೇರಿ ಆಗ್ರಹಿಸಿದ್ದಾರೆ.
ಮಂಗಳೂರು ಪ್ರೆಸ್ ಕ್ಲಬ್ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿ ವೇತನ ಮತ್ತು ಶಿಷ್ಯ ವೇತನ ಸ್ಥಗಿತವಾದರೆ ಸಾವಿರಾರು ವಿದ್ಯಾರ್ಥಿಗಳ ಕಲಿಕೆಗೆ ತೊಡಕಾಗಲಿದೆ ಎಂದರು.
ಅಲ್ಪಸಂಖ್ಯಾತರ ಮತ್ತು ಬುಡಕಟ್ಟು ವ್ಯವಹಾರಗಳ ಹಾಗೂ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದಿಂದ ರಾಷ್ಟ್ರೀಯ ವಿದ್ಯಾರ್ಥಿವೇತನ ಪೋರ್ಟಲ್ನ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ಯೋಜನೆಯಡಿ 1ರಿಂದ 8ನೇ ತರಗತಿಯ ವಿದ್ಯಾರ್ಥಿಗಳಿಗೆ ನೀಡುತ್ತಿದ್ದ ವಿದ್ಯಾರ್ಥಿ ವೇತನವನ್ನು ಮತ್ತು ಅಲ್ಪಸಂಖ್ಯಾತರ ವ್ಯವಹಾರಗಳ ಸಚಿವಾಲಯದಿಂದ ಉನ್ನತ ಶಿಕ್ಷಣಕ್ಕೆ ನೀಡುತ್ತಿದ್ದ ಮೌಲಾನಾ ಆಝಾದ್ ರಾಷ್ಟ್ರೀಯ ಶಿಷ್ಯವೇತನವನ್ನು 2022-23ರ ಶೈಕ್ಷಣಿಕ ವರ್ಷದಿಂದ ರದ್ದುಗೊಳಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಎಸ್.ಐ.ಓ ಖಂಡಿಸಿದೆ.
ಸುತ್ತೋಲೆಯಲ್ಲಿ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕೆ ಈ ಬಾರಿ ಸಲ್ಲಿಕೆಯಾದ ಅರ್ಜಿಗಳ ಪೈಕಿ 9 ಮತ್ತು 10ನೇ ತರಗತಿಯ ವಿದ್ಯಾರ್ಥಿಗಳನ್ನು ಮಾತ್ರ ಪರಿಗಣಿಸಲಾಗುವುದು ಹಾಗೂ ರಾಜ್ಯ ಜಿಲ್ಲಾ ಮತ್ತು ಶಿಕ್ಷಣ ಸಂಸ್ಥೆಯ ನೋಡಲ್ ಅಧಿಕಾರಿಗಳು ಪರಿಶೀಲನಾ ಹಂತದಲ್ಲಿ ಕೇವಲ 9 ಮತ್ತು 10ನೇ ತರಗತಿಯ ವಿದ್ಯಾರ್ಥಿಗಳ ಅರ್ಜಿಗಳನ್ನು ಮಾತ್ರ ಪರಿಶೀಲಿಸಬೇಕೆಂದು ನಿರ್ದೇಶಿಸಿರುವುದು ಅಘಾತಕಾರಿ ನಡೆ ಎಂದರು.