ಮಂಗಳೂರು । ರೈಲ್ವೆ ನಿಲ್ದಾಣದಿಂದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವೋಲ್ವೋ ಬಸ್ ಸೇವೆಗೆ ಚಾಲನೆ

0
300

ಸನ್ಮಾರ್ಗ ವಾರ್ತೆ

ಮಂಗಳೂರು: ಕನ್ನಡ ರಾಜ್ಯೋತ್ಸವದ ಸಂಭ್ರಮದ ನಡುವೆ ಮಂಗಳೂರು ರೈಲ್ವೆ ನಿಲ್ದಾಣದಿಂದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವೋಲ್ವೋ ಬಸ್ ಸೇವೆಗೆ ದಕ್ಷಿಣ ಕನ್ನಡ ಸಂಸದ ಸಂಸದ ನಳಿನ್ ಕುಮಾರ್ ಕಟೀಲ್ ಚಾಲನೆ ನೀಡಿದರು.

ಬಳಿಕ ಮಾತನಾಡಿದ ನಳಿನ್ ಕುಮಾರ್ ಕಟೀಲ್, ಕೆಎಸ್ ಆರ್ ಟಿಸಿ ರೂಟ್ ಗಳಲ್ಲಿ ಖಾಸಗಿ ಬಸ್ಸುಗಳು ಪೈಪೋಟಿ ಮಾಡುವುದು ಸರಿಯಲ್ಲ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಖಾಸಗಿಯವರಿಗೆ ಬೇರೆ ವ್ಯವಸ್ಥೆ ಮಾಡಲಾಗಿದೆ. ಆದರೂ ಕೂಡ ಅವರು ಪೈಪೋಟಿ ನಡೆಸುತ್ತಾರೆ ಅಂದರೆ ನಾವು ಬೇರೆ ದಾರಿ ನೋಡಬೇಕಾಗುತ್ತದೆ. ಅದಕ್ಕೆ ಬೇರೆ ವ್ಯವಸ್ಥೆ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಎಲ್ಲ ಕಡೆ ಕೆಎಸ್ ಆರ್ ಟಿಸಿ ಬಸ್ ಗಳನ್ನ ಯಾಕೆ ಹಾಕಬಾರದು ಎಂಬ ಚರ್ಚೆ ಕೂಡ ನಮ್ಮಲ್ಲಿದೆ. ಒಂದು ವೇಳೆ ಖಾಸಗಿ ಬಸ್ ನವರು ಲಾಬಿ ನಡೆಸಿದರೆ ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲು ನಾನೇ ಸರ್ಕಾರಕ್ಕೆ ಆಗ್ರಹಿಸುತ್ತೇನೆ ಎಂದು ಹೇಳಿದರು.

ಇದೇ ವೇಳೆ ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ ‘ಕರಾವಳಿ ಕನ್ನಡ ತೇರು ಬಸ್ ಸೇವೆ’ಯನ್ನು ಕೂಡ ಉದ್ಘಾಟಿಸಲಾಯಿತು. ಈ ಸಂದರ್ಭದಲ್ಲಿ ಶಾಸಕರಾದ ವೇದವ್ಯಾಸ ಕಾಮತ್, ಡಾ. ಭರತ್ ಶೆಟ್ಟಿ ಮತ್ತು ಉಮಾನಾಥ ಕೋಟ್ಯಾನ್, ಕೆಎಸ್ ಆರ್ ಟಿಸಿ ವಿಭಾಗೀಯ ಅಧಿಕಾರಿ ರಾಜೇಶ್ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.