ಮಾಜಿ ಸಿಎಂ ಯಡಿಯೂರಪ್ಪ ನವರನ್ನು ಮೂಲೆಗುಂಪು ಮಾಡಿಲ್ಲ: ಸದಾನಂದ ಗೌಡ ಸ್ಪಷ್ಟಣೆ

0
627

ಸನ್ಮಾರ್ಗ ವಾರ್ತೆ

ದಾವಣಗೆರೆ: ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನದಿಂದ ಯಡಿಯೂರಪ್ಪ ನವರು ಬಿಜೆಪಿಯಲ್ಲಿ ಮೂಲೆಗುಂಪಾಗಿದ್ದಾರೆ ಎಂಬ ಗುಲ್ಲೆಬ್ಬಿರುವ ಹಿನ್ನೆಲೆಯಲ್ಲಿ ಈ ಬಗ್ಗೆ ಸ್ಪಷ್ಟೀಕರಣ ನೀಡಿರುವ ಬಿಜೆಪಿ ಮುಖಂಡ ಸದಾನಂದ ಗೌಡ, ನಾವು ಖಂಡಿತವಾಗಿಯೂ ಯಡಿಯೂರಪ್ಪರನ್ನು ಮೂಲೆಗುಂಪು ಮಾಡಿಲ್ಲ. ಸದ್ಯ ಶಾಸಕಾಂಗ ಪಕ್ಷದ ನಾಯಕರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯಾಗಿದ್ದಾರೆ.‌ ಹಾಗಾಗಿ ಅವರ ಹೆಸರು ಮುಂಚೂಣಿಯಲ್ಲಿರುತ್ತದೆ ಅಷ್ಟೇ. ಹಾಗಂದ ಮಾತ್ರಕ್ಕೆ ಅವರು ಮೂಲೆಗುಂಪಾಗಿದ್ದಾರೆ ಎಂಬ ಮಾತಿನಲ್ಲಿ ಸತ್ಯ ಇಲ್ಲ ಎಂದು ದಾವಣಗೆರೆಯಲ್ಲಿ ಹೇಳಿಕೆ ನೀಡಿದ್ದಾರೆ.

ಸದ್ಯ ದಾವಣಗೆರೆಯ ರೆಸಾರ್ಟ್‌ ವೊಂದರಲ್ಲಿ ಬಿಜೆಪಿ ಕೋರ್​ ಕಮಿಟಿ ಸಭೆ ನಡೆಯುತ್ತಿದ್ದು, ಎಲ್ಲ ಚುನಾವಣೆಗಳನ್ನೂ ಬಿಜೆಪಿ ಗಂಭೀರವಾಗಿ ಪರಿಗಣಿಸಿದೆ. ನಮ್ಮ ಕಾರ್ಯಾಚರಣೆಗಳ ಬಗ್ಗೆ ನಾವು ಸಭೆಯಲ್ಲಿ ಚರ್ಚಿಸಲಿದ್ದೇವೆ. ಸಾಮೂಹಿಕ ನಾಯಕತ್ವದಡಿಯಲ್ಲಿ ಕೆಲಸ ನಡೆಸಲಾಗುತ್ತದೆ. ಆದ್ದರಿಂದ ಎಲ್ಲರನ್ನೂ ಒಟ್ಟಿಗೆ ತೆಗೆದುಕೊಂಡು ಹೋಗುತ್ತೇವೆ. ಮಾಜಿ ಸಿಎಂ ಯಡಿಯೂರಪ್ಪನವರನ್ನು ಮೂಲೆಗುಂಪು ಮಾಡಲಾಗಿದೆ ಎಂಬ ಮಾತನ್ನು ನಾನು ಒಪ್ಪುವುದಿಲ್ಲ ಎಂದು ಸದಾನಂದ ಗೌಡ ಹೇಳಿಕೆ ನೀಡಿದ್ದಾರೆ.

ಎರಡು ದಿನಗಳ ಕಾಲ ದಾವಣಗೆರೆಯ ಖಾಸಗಿ ರೆಸಾರ್ಟ್​ನಲ್ಲಿ ನಡೆಯಲಿರುವ ಬಿಜೆಪಿ ಕೋರ್‌ ಸಮಿತಿ ಸಭೆಗೆ ಕರ್ನಾಟಕ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ, ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲು​, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಜಗದೀಶ್ ಶೆಟ್ಟರ್ ಸೇರಿದಂತೆ ಹಲವರು ಆಗಮಿಸಿದ್ದಾರೆ.