ಸನ್ಮಾರ್ಗ ವಾರ್ತೆ
ಮಂಗಳೂರು, ಮಾ. 26- : ಮಂಗಳೂರಿನ ಜಿಲ್ಲಾ ವೆನ್ಲಾಕ್ ಆಸ್ಪತ್ರೆಯನ್ನು ಸಂಪೂರ್ಣವಾಗಿ ಕೊರೊನಾ ಚಿಕಿತ್ಸಾ ಆಸ್ಪತ್ರೆಯನ್ನಾಗಿ ಪರಿವರ್ತನೆ ಮಾಡಲಾಗುವುದು ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಇವತ್ತು ಈ ಕುರಿತಂತೆ ವೈದ್ಯಕೀಯ ಕಾಲೇಜುಗಳ ಮುಖ್ಯಸ್ಥರು ಮತ್ತು ವೈದ್ಯರುಗಳೊಂದಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಚರ್ಚಿಸಿ ಮಾಹಿತಿ ನೀಡಿದ್ದಾರೆ.
ವೆನ್ಲಾಕ್ ಆಸ್ಪತ್ರೆಯ 20 ಹಾಸಿಗೆಗಳ ಆಯುಷ್ ಕಟ್ಟಡದಲ್ಲಿ ಕೊರೊನಾ ಶಂಕಿತರನ್ನು ದಾಖಲಿಸಿಲಾಗುತ್ತದೆ. ಅವರಲ್ಲಿ ಯಾರಿಗಾದರೂ ಪಾಸಿಟಿವ್ ಕಂಡು ಬಂದಲ್ಲಿ ಅವರನ್ನು ಸೂಪರ್ ಸ್ಪೆಶಾಲಿಟಿ ಕಟ್ಟಡದ ವಾರ್ಡಿಗೆ ವರ್ಗಾವಣೆ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ.
ಈಗಾಗಲೇ ಆಸ್ಪತ್ರೆಯಲ್ಲಿ ಬೇರೆ ಬೇರೆ ಕಾಯಿಲೆಗಳಿಗಾಗಿ ಒಳರೋಗಿಗಳಾಗಿ ದಾಖಲಾಗಿರುವ ಸುಮಾರು 218 ರೋಗಿಗಳನ್ನು ಹಂತ ಹಂತವಾಗಿ ಹತ್ತಿರ ವೈದ್ಯಕೀಯ ಕಾಲೇಜು ಆಸ್ಪತ್ರೆಗಳಿಗೆ ಮೂರು ದಿನಗಳ ಒಳಗಾಗಿ ವರ್ಗಾವಣೆ ಮಾಡಲಾಗುವುದು ಎಂದ ಅವರು ಹೊರರೋಗಿ ಚಿಕಿತ್ಸೆಗಾಗಿ ಬರುವವರನ್ನು ಸಮೀಪದ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕಳುಹಿಸಲಾಗುವುದು. 705 ಹಾಸಿಗೆಗಳ ವೆನ್ಲಾಕ್ ಆಸ್ಪತ್ರೆಯ ಹಳೆ ಕಟ್ಟಡದ ವಾರ್ಡ್ಗಳನ್ನು ಕೊರೊನಾ ರೋಗಿಗಳನ್ನು ದಾಖಲಿಸಲು ಉಪಯೋಗಿಸಲಾಗುವುದು ಎಂದರು. ಅಗತ್ಯ ಬಿದ್ದರೆ ಮುಂದಿನ ದಿನಗಳಲ್ಲಿ ವೈದ್ಯಕೀಯ ಕಾಲೇಜು ಆಸ್ಪತ್ರೆಗಳಲ್ಲಿ 20 ಹಾಸಿಗೆಯ ಐಸೋಲೇಷನ್ ವಾರ್ಡ್ಗಳನ್ನು ತೆರೆಯಲಾಗುವುದು. ಇದೇ ರೀತಿ ತಾಲೂಕುಗಳಲ್ಲಿ ಪರಿಸ್ಥಿತಿಯನ್ನು ನೋಡಿಕೊಂಡು ವ್ಯವಸ್ಥೆ ಮಾಡಲಾಗುತ್ತದೆ ಎಂದರು.
ವೆನ್ಲಾಕ್ ಆಸ್ಪತ್ರೆಯಲ್ಲಿ ವೈದ್ಯರು ಹಾಗೂ ನರ್ಸ್ಗಳಿಗೆ ಕೊರತೆಯಾದಲ್ಲಿ ಖಾಸಗಿ ಆಸ್ಪತ್ರೆಗಳ ನರ್ಸ್ಗಳಿಗೆ ತರಬೇತಿ ನೀಡಿ ಬಳಸಿಕೊಳ್ಳಲಾಗುತ್ತದೆ. ಸದ್ಯ ವೆನ್ಲಾಕ್ ನಲ್ಲಿ 52 ವೆಂಟಿಲೇಟರ್ಗಳಿದ್ದು , ಹೊಸ ಕಟ್ಟಡದಲ್ಲಿ 100 ವೆಂಟಿಲೇಟರ್ಗಳನ್ನು ಅಳವಡಿಸುವುದಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದರು.
ಈ ಸಂದರ್ಭದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ಡಾ. ಭರತ್ ಶೆಟ್ಟಿ, ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್, ಅಪರ ಜಿಲ್ಲಾಧಿಕಾರಿ ರೂಪ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.