ರೈತ ಮತ್ತು ಜನ ವಿರೋಧಿ ಕಾಯ್ದೆಗಳನ್ನು ವಿರೋಧಿಸಿ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಪ್ರತಿಭಟನಾ ಧರಣಿ

0
423

ಸನ್ಮಾರ್ಗ ವಾರ್ತೆ

ಕಲಬುರ್ಗಿ: ಕೇಂದ್ರ ಸರಕಾರ ಜಾರಿ ಮಾಡಿದ ರೈತ ಮತ್ತು ಜನ ವಿರೋಧಿ ಕಾಯ್ದೆಗಳನ್ನು ವಿರೋಧಿಸಿ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಕಲಬುರ್ಗಿ ಜಿಲ್ಲಾ ಸಮಿತಿ ಪ್ರತಿಭಟನಾ ಧರಣಿ ಮಾಡಿದರು. ನಗರದ ಜಗತ್ ಸರ್ಕಲ್ ಬಳಿಯಲ್ಲಿ ನಡೆದ ಪ್ರತಿಭಟನಾ ಧರಣಿಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

‘ಕೇಂದ್ರ ಮತ್ತು ರಾಜ್ಯದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರ ಜನವಿರೋಧಿ ಕಾಯ್ದೆಗಳನ್ನು ಜಾರಿಗೊಳಿಸುತ್ತಿದೆ. ಬಿಜೆಪಿಗೆ ರೈತರು, ಕಾರ್ಮಿಕರು ಹಾಗೂ ಬಡ ಜನರ ಬಗ್ಗೆ ಕಿಂಚಿತ್ತೂ ಕಾಳಜಿಯಿಲ್ಲ. ಸರ್ಕಾರಗಳು ಬ್ರಿಟೀಷರಿಗಿಂತಲೂ ಕಡೆಯಾದ ಅಪಾಯಕಾರಿ ಕಾಯ್ದೆಗಳನ್ನು ಜಾರಿಗೊಳಿಸುತ್ತಿವೆ. ರಿಯಲ್‌ ಎಸ್ಟೇಟ್‌ ದಂಧೆಕೋರರು, ಬಂಡವಾಳಶಾಹಿಗಳು ಹಾಗೂ ಬಹುರಾಷ್ಟ್ರೀಯ ಕಂಪೆನಿಗಳ ಕೈಗೊಂಬೆಯಾಗಿರುವ ಪ್ರಧಾನಿ ಮೋದಿಯವರು ಸುಗ್ರೀವಾಜ್ಞೆ ಮೂಲಕ ಜನ ವಿರೋಧಿ ಕಾಯ್ದೆಗಳನ್ನು ಜಾರಿಗೊಳಿಸುತ್ತಿದ್ದಾರೆ. ಅವರ ಕೃಷಿ ವಿರೋಧಿ ನಡೆಯಿಂದ ರೈತ ಕುಲ ತಬ್ಬಲಿಯಾಗುವ ದುಸ್ಥಿತಿ ಬರಲಿದೆ’.

‘ಕೇಂದ್ರ ಸರ್ಕಾರ ಕೃಷಿ ವಿರೋಧಿ ಕಾಯ್ದೆಗಳ ಮೂಲಕ ರೈತ ಸಮುದಾಯಕ್ಕೆ ಕೊರೋನ ಸೋಂಕಿಗಿಂತಲೂ ದೊಡ್ಡ ಆಘಾತ ನೀಡಿದೆ. ರೈತರ ಮನೆ ಹಾಳು ಮಾಡಲು ಕೃಷಿ ವಿರೋಧಿ ಕಾಯ್ದೆಗಳನ್ನು ಜಾರಿ ಮಾಡಲಾಗಿದೆ. ಈ ಕಾಯ್ದೆಗಳಿಗೆ ರೈತರ ಸಂಪೂರ್ಣ ವಿರೋಧವಿದೆ. ಕೇಂದ್ರದಲ್ಲಿ ಇರುವುದು ರೈತ ವಿರೋಧಿ ಸರ್ಕಾರ’

‘ದೆಹಲಿಯಲ್ಲಿ ನಡೆಯುತ್ತಿರುವ ರೈತರ ಹೋರಾಟದ ಬಗ್ಗೆ ಜಾಗತಿಕವಾಗಿ ಚರ್ಚೆಯಾಗುತ್ತಿದೆ. ಹಲವು ದೇಶಗಳು ಈ ಬಗ್ಗೆ ಪ್ರಶ್ನೆ ಮಾಡುತ್ತಿವೆ. ಆದರೆ, ಕೇಂದ್ರ ಸರ್ಕಾರ ರೈತರ ಹೋರಾಟವನ್ನು ಗಂಭೀರವಾಗಿ ಪರಿಗಣಿಸಿಲ್ಲ. ಪ್ರಧಾನಿ ಮೋದಿ ಸರ್ವಾಧಿಕಾರಿ ಹಿಟ್ಲರ್‌ ಧೋರಣೆ ಅನುಸರಿಸುತ್ತಿದ್ದಾರೆ’

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸುಳ್ಳು ಹೇಳುವುದರಲ್ಲಿ ಪರಿಣಿತರು. ಚುನಾವಣೆಗೆ ಮುನ್ನ ನೀಡಿರುವ ಯಾವುದೇ ಭರವಸೆ ಈಡೇರಿಸಿಲ್ಲ. ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆ ನೀಡುವ ಕುರಿತಾಗಿ ಸ್ವಾಮಿನಾಥನ್ ವರದಿ ಬಗ್ಗೆ ಚಕಾರವಿಲ್ಲ. ಕೃಷಿ ಕಾಯ್ದೆ ತಿದ್ದುಪಡಿ ಮಾಡುವುದಾದರೆ, ಸ್ವಾಮಿನಾಥನ್ ವರದಿಯಂತೆ ಪ್ರತಿವರ್ಷ ಕನಿಷ್ಠ ಬೆಂಬಲ ಬೆಲೆ ಪರಿಷ್ಕರಿಸಿ, ರೈತರಿಗೆ ಅನುಕೂಲ ಮಾಡಿಕೊಡಬೇಕಿದೆ ಎಂದರು.

ದೇಶದ ರೈತರು ಸಂಕಷ್ಟದಲ್ಲಿದ್ದಾರೆ. ಲಾಕ್ ಡೌನ್ ನಡುವೆ ತರಾತುರಿಯಲ್ಲಿ ಜಾರಿಗೆ ತಂದಿರುವ ಮೂರು ಕಾಯ್ದೆಗಳ ವಿರುದ್ಧ ರೈತರು ಎರಡು ತಿಂಗಳಿಂದ ನವದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.ಅನೇಕ ರೈತರು ಜೀವ ಕಳೆದುಕೊಂಡಿದ್ದಾರೆ. ನಿರುದ್ಯೋಗ ಸಮಸ್ಯೆ ಮಿತಿ ಮೀರಿದೆ. ಈ ಕುರಿತು ಒಂದು ಸಲವೂ ಪ್ರಧಾನಿ ಮೋದಿ ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ಮಾತನಾಡಿಲ್ಲ ಎಂದರು.

‘ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ತಿದ್ದುಪಡಿ ಕಾಯ್ದೆ, ಅಗತ್ಯ ಸರಕುಗಳ ಕಾಯ್ದೆ ಮತ್ತು ಕಾರ್ಮಿಕ ಕಾಯ್ದೆಗಳನ್ನು ಹಿಂಪಡೆಯಬೇಕು. ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಕಾನೂನು ಖಾತ್ರಿಪಡಿಸಬೇಕು. ಸಂಕಷ್ಟದಲ್ಲಿರುವ ರೈತ ಕುಲವನ್ನು ರಕ್ಷಣೆ ಮಾಡಬೇಕು. ಇಲ್ಲದಿದ್ದರೆ ರೈತರ ಹೋರಾಟ ಮತ್ತಷ್ಟು ತೀವ್ರಗೊಳ್ಳುತ್ತದೆ’ ಎಂದು ಎಚ್ಚರಿಕೆ ನೀಡಿದರು.

‘ಕೇಂದ್ರ ಸರ್ಕಾರದ ರೈತ ವಿರೋಧಿ ಕಾನೂನುಗಳ ಜಾರಿಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿರುವುದು ರೈತರ ಹೋರಾಟಕ್ಕೆ ಜಯವಾಗಿದೆ.ಆದರೆ, ತಜ್ಞರ ಸಮಿತಿ ರಚಿಸಿರುವುದು ಕುರಿಯನ್ನು ಕಾಯಲು ತೋಳವನ್ನು ಕಾವಲಿಗೆ ಇಟ್ಟಂತೆ ಆಗಿದೆ. ಆದ್ದರಿಂದ ಈ ಸಮಿತಿಯನ್ನು ರದ್ದುಗೊಳಿಸಿ ರೈತ ಮುಖಂಡರನ್ನು ಒಳಗೊಂಡ ಸಮಿತಿ ರಚಿಸಿ ವರದಿ ಪಡೆಯಬೇಕು’ ಎಂದು ಅವರು ಆಗ್ರಹಿಸಿದರು.

‘ಸಮಿತಿಯಲ್ಲಿರುವ ತಜ್ಞರು ಸರ್ಕಾರದ ‌ಕಾನೂನುಗಳನ್ನು ರಚಿಸುವಲ್ಲಿ ಹಾಗೂ ಜಾರಿಗೊಳಿಸುವಲ್ಲಿ ಪ್ರಮುಖ ಪಾತ್ರವಹಿಸಿದವರೇ ಇದ್ದಾರೆ. ಇವರಿಂದಾಗಿ ರೈತರ ಒತ್ತಾಯಗಳ ಬಗ್ಗೆ ನಿಷ್ಪಕ್ಷಪಾತ ವರದಿ ತಯಾರಿಸುವುದು ಸಾಧ್ಯವಿಲ್ಲ. ಪರಿಣಿತರು ಹಾಗೂ ಹೋರಾಟ ನಿರತ ರೈತ ಮುಖಂಡರನ್ನು ಒಳಗೊಂಡ ಸಮಿತಿ ರಚಿಸಬೇಕು’ ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ರಾಜ್ಯಧ್ಯಕ್ಷ ಅಡ್ವೋಕೇಟ್ ತಾಹಿರ್ ಹುಸೇನ್, ಅಬ್ದುಲ್ ಹಮೀದ್ ಫಾರಂ(ರಾಷ್ಟ್ರೀಯ ಉಪಾಧ್ಯಕ್ಷರು, ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ), ಅಜೀಜ್ ಜಾಗಿರ್ದಾರ್(ರಾಜ್ಯ ಮಾಧ್ಯಮ ಕಾರ್ಯದರ್ಶಿ, ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ), ಸಲೀಂ ಅಹಮದ್ ಚಿತಾಪುರ(ಜಿಲ್ಲಾಧ್ಯಕ್ಷರು, ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ), ಸಿದ್ದಣ್ಣ ಜಿ ಚಕ್ರ(ಜಿಲ್ಲಾ ಉಪಾಧ್ಯಕ್ಷರು, ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ), ಮೋಬಿನ್ ಅಹ್ಮದ್(ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ), ಅಜೀಜ್ ಪಟೇಲ್ ಯಾಳವಾರ್(ಜಿಲ್ಲಾ ಕಾರ್ಯದರ್ಶಿ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ), ಮುನೀರ್ ಹಾಸ್ಮಿ(ನಗರ ಘಟಕ ಅಧ್ಯಕ್ಷರು, ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ), ಸಲೀಂ ಸದರಿ(ನಗರ ಘಟಕ ಪ್ರಧಾನ ಕಾರ್ಯದರ್ಶಿ, ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ) ಇದ್ದರು.